ಶಿವಮೊಗ್ಗ: . ಶ್ರೇಣೀಕೃತ ಸಮಾಜದ ಸಮರ್ಥನೆಯೇ ಬಿಜೆಪಿ ಹಾಗೂ ಆರ್ಎಸ್ಎಸ್ನ ಮುಖ್ಯ ಅಜೆಂಡಾವಾಗಿದ್ದು, ಗಾಂಧಿ ಹಾಗೂ ಅಂಬೇಡ್ಕರ್ ಅವರ ಜಾತ್ಯಾತೀತ ಹಾಗೂ ಸಮಾಜವಾದಿ ಆಶಯಗಳಿಗೆ ವಿರುದ್ಧವಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದರು.
ಗುರುವಾರ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂವಿಧಾನ ಒಪ್ಪಿದರೆ ಆರ್.ಎಸ್.ಎಸ್. ಅನ್ನು ತಿರಸ್ಕರಿಸಬೇಕು. ಅಥವಾ ಆರ್.ಎಸ್.ಎಸ್. ಒಪ್ಪಿದರೆ ಸಂವಿಧಾನ ತಿರಸ್ಕರಿಸಬೇಕು. ಆದರೆ, ಇವರು ದ್ವಂದ್ವ ನಿಲುವು ತಾಳಿದ್ದಾರೆ. ಜಾತ್ಯತೀತವನ್ನೇ ವಿರೋಧಿಸುತ್ತಿದ್ದಾರೆ. ಮೀಸಲಾತಿಯನ್ನು ಒಪ್ಪುತ್ತಿಲ್ಲ. ಈ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದರು.
ಮನುಷ್ಯರ ನಡುವೆ ಮೇಲು ಕೀಳು ಭಾವನೆ ಇರಬಾರದು, ಆದರೆ ಶ್ರೇಣೀಕೃತ ಸಮಾಜ ಸಮರ್ಥನೆಯನ್ನು ಬಿಜೆಪಿಯವರು ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ವಿವರಣೆ ಇದೆ. ಈ ಪುಸ್ತಕವನ್ನು ಬಿಜೆಪಿ ಒಪ್ಪಿಕೊಂಡಿದೆ ಎಂದಾದರೆ ಶ್ರೇಣೀಕೃತ ಸಮಾಜವನ್ನು ಸಮರ್ಥನೆ ಮಾಡಿಕೊಂಡಂತೆ ಆಗುತ್ತದೆ. ಆದ್ದರಿಂದ ಗೋಳ್ವಾಲ್ಕರ್ ಮತ್ತು ಹೆಗಡೇವಾರ್ ಹೇಳಿದ್ದನ್ನು ನಾವು ಒಪ್ಪುವುದಿಲ್ಲ ಎಂದು ಧೈರ್ಯವಾಗಿ ಬಿಜೆಪಿಯವರು ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.
ಗಾಂಧಿ, ಅಂಬೇಡ್ಕರ್, ಸ್ವಾಮಿ ವಿವೇಕಾನಂದ, ನೆಹರೂ ಇವರ ಪ್ರತಿಪಾದನೆಗಳು ಸಮಾಜವಾದಿ ಮತ್ತು ಜಾತ್ಯತೀತ ನಿಲುವೇ ಆಗಿವೆ. ಆದರೆ, ಬಿಜೆಪಿ ಮತ್ತು ಆರ್.ಎಸ್.ಎಸ್. ಪರಿವಾರದವರು ಈ ಆಶಯಗಳಿಗೆ ವಿರುದ್ಧವಾಗಿದ್ದಾರೆ. ಹೆಗಡೇವಾರ್, ಗೋಳ್ವಾಲ್ಕರ್, ಸಾವರ್ಕರ್, ಗಾಂಧಿ ಹಂತಕ ನಾಥೂರಾಮ್ ಗೂಡ್ಸೆ ಮುಂತಾದವರ ಚಿಂತನೆಗಳೇ ಬೇರೆ. ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪ ದರ್ಶನದ ಸಂವಿಧಾನವನ್ನು ತಂತ್ರಗಾರಿಕೆಯ ಹಿಂಸೆಯನ್ನು ಅನುಷ್ಠಾನಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದರು.
ಚಿಂತನ ಗಂಗಾದ ಇಂಗ್ಲಿಷ್ ಆವೃತ್ತಿಯ ಪುಟ ೧೧೨ ಮತ್ತು ೧೧೩ರಲ್ಲಿ ಸಂಸ್ಕೃತಕ್ಕೆ ಮೊದಲ ಸ್ಥಾನ ನೀಡಲಾಗಿದೆ. ಹಾಗೆಯೇ ಈ ಕೃತಿಗಳಲ್ಲಿ ಜಾತಿ ವ್ಯವಸ್ಥೆ ಸಮರ್ಥನೆ, ಒಕ್ಕೂಟ ವ್ಯವಸ್ಥೆ ರದ್ದು ಮಾಡುವುದು, ಮೀಸಲಾತಿ ವಿರೋಧ, ಅಷ್ಟೇಕೆ ಬಿಜೆಪಿ ಒಂದು ಸಂವಿಧಾನದ ಭಾಗವೇ ಎಂದು ಹೇಳಲಾಗುತ್ತಿದೆ. ಈ ಪುಸ್ತಕವನ್ನು ಒಪ್ಪಿಕೊಳ್ಳುವ ಮೂಲಕ ಬಿಜೆಪಿ ದಲಿತರು ಹಿಂದುಗಳೇ ಅಲ್ಲ ಎಂಬ ಭಾವನೆಗೆ ಬಂದಂತಿದೆ. ಮೀಸಲಾತಿ ಕೂಡ ಬೇಡ ಎಂದು ಹೇಳಿದ್ದಾರೆ. ಇದಕ್ಕೆಲ್ಲಾ ಬಿಜೆಪಿ ಮತ್ತು ಸಂಘ ಪರಿವಾದವರು ಉತ್ತರ ಕೊಡಬೇಕಲ್ಲ ಎಂದರು.

ದೇಶದ ಮತ್ತು ರಾಜ್ಯಗಳ ಸುಮಾರು ೪ ಸಾವಿರ ಭಾಷೆಗಳ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಮತ್ತು ರಾಷ್ಟ್ರಧ್ವಜವನ್ನೇ ತೆಗೆದು ಹಾಕಿ ಚಿಂತನ ಗಂಗಾ ಪ್ರತಿಪಾದಿಸುವ ಭಗವಾಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡಬೇಕು ಎನ್ನುವುದನ್ನು ಹೇಗೆ ಒಪ್ಪಲು ಸಾಧ್ಯ ಎಂದರು.
ಹಾಗಾಗಿ ದೇಶದ ಜನರನ್ನು ಗೂಳಿಯ ಹಿಂದೇ ಏನೋ ಸಿಗುತ್ತೆ ಎಂದು ಓಡುವ ನರಿಯನ್ನಾಗಿ ಮಾಡಬಾರದು, ಬಿಜೆಪಿ ತನ್ನ ಅಂತರಂಗವನ್ನು ಬಹಿರಂಗಪಡಿಸಿ ಚರ್ಚೆಗೆ ಸಿದ್ಧರಾಗಲಿ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಷಾ, ಪ್ರಮುಖರಾದ ರಮೇಶ್ ಹೆಗ್ಡೆ, ಶಿವಾನಂದ್, ಕಲಗೋಡು ರತ್ನಾಕರ್ ಮೊದಲಾದವರಿದ್ದರು.
