ಬೆಂಗಳೂರು, ಜು.12: ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆತುರದಲ್ಲೂ ಇಲ್ಲ, ಆತಂಕದಲ್ಲೂ ಇಲ್ಲ ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಪ್ರತಿಕ್ರಿಯೆ ನೀಡಿದರು.
ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬಾರದು ಎಂದು ಹೈಕಮಾಂಡ್ ನಿರ್ದೇಶನವಿದ್ದರೂ ಸಿಎಂ ಮೂರು ಬಾರಿ ನಾನೇ 5 ವರ್ಷ ಸಿಎಂ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಗಳವಿಲ್ಲ. ಕಾಂಗ್ರೆಸ್ ಪಕ್ಷದ ವರಿಷ್ಠರು, ಮುಖ್ಯಮಂತ್ರಿಗಳು, ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಕೂಡ ಈಗಾಗಲೇ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಸಿದ್ದರಾಮಯ್ಯ ಅವರು ನಾಯಕತ್ವದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ.
ಆದರೂ ಮಾಧ್ಯಮಗಳಿಗೆ ಯಾಕೆ ಗೊಂದಲವಿದೆ ಎಂದು ಗೊತ್ತಿಲ್ಲ. ಶಿವಕುಮಾರ್ ಅವರು ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಪಕ್ಷದ ಕಾರ್ಯಕರ್ತನಾಗಿ ಮುನ್ನಡೆಸುತ್ತಿದ್ದಾರೆ. ಪಕ್ಷದ ಸೂಚನೆಯಂತೆ ಅವರು ಕೆಲಸ ಮಾಡುತ್ತಿದ್ದಾರೆ. ಇದರ ಹೊರತಾಗಿ ಹೆಚ್ಚಿನ ವಿಚಾರ ಏನೂ ಇಲ್ಲ. ಸಧ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಪದೇ ಪದೆ ಈ ವಿಚಾರ ಯಾಕೆ ಚರ್ಚೆಯಾಗುತ್ತಿದೆ ಗೊತ್ತಿಲ್ಲ” ಎಂದರು.
ಇದೇ ನನ್ನ ಕೊನೆ ಚುನಾವಣೆ ಎಂದಿದ್ದ ಸಿದ್ದರಾಮಯ್ಯ ಅವರು ಈಗ 2028ಕ್ಕೂ ನನ್ನದೇ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಹಿರಿಯ ನಾಯಕರು. ರಾಜಕೀಯದಲ್ಲಿ ನಿವೃತ್ತಿ ಇಲ್ಲ. ರಾಜಕೀಯ ಇಚ್ಛಾಶಕ್ತಿ ಇರಬೇಕು. ಮುಖ್ಯಮಂತ್ರಿಗಳಿಗೆ ಇಚ್ಛಾಶಕ್ತಿ ಇದೆ. ಹೀಗಾಗಿ ಅವರು ಕೆಲವು ವಿಚಾರವನ್ನು ನಿಮ್ಮ ಜೊತೆ ಹಂಚಿಕೊಂಡಿರಬಹುದು” ಎಂದು ತಿಳಿಸಿದರು.
ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದ ಮೇಲೆ ಸಿಎಂ ಪದೇ ಪದೆ ನಾನೇ ಸಿಎಂ ಎಂದು ಹೇಳುವ ಅಗತ್ಯವಿದೆ ಎಂದು ಕೇಳಿದಾಗ, “ಈ ವಿಚಾರವಾಗಿ ಮಾತನಾಡಲು ನಾನು ಬಹಳ ಸಣ್ಣವನು” ಎಂದರು.
