ಬೆಂಗಳೂರು,ಆ.11: ಮತಗಳ್ಳತನಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿಗೆ ಚುನಾವಣೆಯ ಆಯೋಗ ನೋಟಿಸ್ ನೀಡಿದೆ. ತಪ್ಪಾಗಿರುವುದು ಆಯೋಗದಿಂದಲೆ ಹಾಗಾಗಿ ಅವರ್ಯಾರು ನೋಟಿಸ್ ನೀಡಲು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.
ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.
