ಅಟ್ರಾಸಿಟಿ ಕೇಸು: ಆರೋಪಿಗಳ ಜೊತೆ ಷಾಮೀಲಾದರೆ ಕಠಿಣ ಕ್ರಮ
ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ೬೦ ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಕಳೆದ ಆರು ತಿಂಗಳಲ್ಲಿ ಶೇ.೮೪ ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಶೇ.೧೦೦ ಪ್ರಕರಣಗಳಲ್ಲಿ ೬೦ದಿನಗಳ ಒಳಗಾಗಿ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮೇಲಿನ ದೌರ್ಜನ್ಯ ತಡೆ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು. ಪೊಲೀಸರು ಇದರಲ್ಲಿ ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ ೫೬ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ೧೧ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಕರಣಗಳ ಸರಿಯಾದ ವಿಚಾರಣೆ ನಡೆಸಿ, ತ್ವರಿತವಾಗಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.೧೦ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸಭೆಯಲ್ಲಿ ಸಮಾಜಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ, ಸಚಿವರಾದ ಕೆ.ಹೆಚ್ ಮುನಿಯಪ್ಪ, ಆರ್. ಬಿ ತಿಮ್ಮಾಪುರ್, ಶಾಸಕರಾದ ಎ.ಸಿ ಶ್ರೀನಿವಾಸ್, ಹೆಚ್ ವಿ ವೆಂಕಟೇಶ್, ಸುಧಾಮ್ ದಾಸ್, ಎ.ಆರ್ ಕೃಷ್ಣಮೂರ್ತಿ, ನರೇಂದ್ರಸ್ವಾಮಿ, ಸರ್ಕಾರದ ಮುಖ್ಯಕಾರ್ಯದರ್ಶಿಶಾಲಿನಿ ರಜನೀಶ್ ಉಪಸ್ಥಿತರಿದ್ದರು.
