ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ29
ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ. ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸೋಮವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ ಹಣಕಾಸಿನ ನೆರವು ಸಿಕ್ಕಿಲ್ಲ. ಎಲ್ಲಾ ಅಭಿವೃದ್ಧಿಯನ್ನು ರಾಜ್ಯ ಸರ್ಕಾರದ ಹಣದಿಂದಲೇ ಪೂರೈಸಿದ್ದೇನೆ ಎಂದ ಅವರು, ನೀಟ್, ಪರೀಕ್ಷೆಯ ನಿಯಂತ್ರಣವನ್ನು ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರಕ್ಕೆ ಬಿಡಬಾರದು. ಅದನ್ನು ರದ್ದು ಮಾಡಬೇಕು. ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿ ತನ್ನ ಆಡಳಿತದಲ್ಲಿರುವ ಮಹಾರಾಷ್ಟ್ರದಲ್ಲಿಯೇ ಟಿಇಟಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಇದರ ಬಗ್ಗೆ ಬಿಜೆಪಿಗರು ಸೊಲ್ಲೆತ್ತುತ್ತಿಲ್ಲ. ನೀಟ್ ಮರು ಪರೀಕ್ಷೆಯಲ್ಲಿಯೂ ವಿದ್ಯಾರ್ಥಿಗಳು ತೊಂದರೆಗೆ ಸಿಲುಕಿದ್ದು ಮಕ್ಕಳ ಭವಿಷ್ಯದಲ್ಲಿ ಬಜೆಪಿಯಿಂದ ಆಗಿರುವ ದೊಡ್ಡ ದುರಂತ ಎಂದು ಕಿಡಿಕಾರಿದರು.
