ಧರ್ಮೇಂದ್ರ ಪ್ರದಾನ್ ರಾಜೀನಾಮೆಗೆ ಆಗ್ರಹಿಸಿ ನಾಳೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಶಿವಮೊಗ್ಗ: ಜೂ.30: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರದಾನ್ ಅವರ ರಾಜೀನಾಮೆಗೆ ಅಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷ ನಾಳೆ ( ಜು.1) ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಸಚಿವ ಧರ್ಮೇಂದ್ರಪ್ರದಾನ್ ಅವರ ಆಪ್ತ ಕೋಚಿಂಗ್ ಸೆಂಟರ್ ಗಳ ಮೂಲಕವೇ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡಲಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಬಿಡದೆ ಸುಮ್ಮನೆ ಕುಳಿತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮಕ್ಕಳ ಕುಟುಂಬಗಳಿಗೆ ಸಾಂತ್ವಾನವನ್ನು ಹೇಳಿಲ್ಲ . ಇಂತಹ ದುರಾಡಳಿತವನ್ನು ಖಂಡಿಸಿ ನಾಳೆ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದರು.
ನೀಟ್ ಪರೀಕ್ಷೆ ಅನೇಕ ಅಕ್ರಮಗಳಿಗೆ ಕಾರಣವಾಗಿದ್ದು,ಇದನ್ನು ಕೊಡಲೆ ರದ್ದುಗೊಳಿಸಿ ಕರ್ನಾಟಕದ ಸಿಈಟಿ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಕಾಂಗ್ರೆಸ್ ನ ಮುಖ್ಯಮಂತ್ರಿಗಳಾಗಿದ್ದ ವೀರಪ್ಪಮೊಯ್ಲಿ ಅವರು ಪ್ರತಿಭಾವಂತ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಸಮರ್ಪಕ ಪರೀಕ್ಷಾ ವ್ಯವಸ್ಥೆಯಾಗಿ ಸಿಇಟಿಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಅದೇ ಮಾದರಿ ಮುಂದುವರೆಸಲು ಸರ್ಕಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮೂಲಕ ವಿದ್ಯಾರ್ಥಿಗಳು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ನ್ಯಾಯ ಒದಗಿಸಲು ಸಚಿವ ಧರ್ಮೇಂದ್ರಪ್ರದಾನ್ ರಾಜೀನಾಮೆ ಕೊಡಬೇಕು. ಇಲ್ಲದೆ ಹೋದರೆ ಕಾಂಗ್ರೆಸ್ ಪಕ್ಷ ತೀವ್ರ ಸ್ವರೂಪದ ಹೋರಾಟವನ್ನು ಮುಂದುವರೆಸಲಿದೆ, ಎಂದ ಆರ್. ಪ್ರಸನ್ನಕುಮಾರ್ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಾಳೆ ನಗರದ ಬಸ್ ನಿಲ್ದಾಣ, ಸೈನ್ಸ್ ಮೈದಾನ ದಿಂದ ವಿದ್ಯಾರ್ಥಿಗಳ ಮೆರವಣಿಗೆ ಆರಂಭಗೊಂಡು ಶೀನಪ್ಪಶೆಟ್ಟಿ (ಗೋಪಿಸರ್ಕಲ್ ) ವೃತ್ತದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಮಧುಬಂಗಾರಪ್ಪ, ಕಿಮ್ಮನೆ ರತ್ನಾಕರ್, ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು, ಮುಖಂಡರುಗಳು, ಎಲ್ಲಾ ಘಟಕಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಕೆ. ದೇವೇಂದ್ರಪ್ಪ, ಎನ್ ಎಸ್ ಯುಐ ಅಧ್ಯಕ್ಷ ವಿಜಯ್, ಕೈಮಗ್ಗ ಅಭಿವೃಧ್ದಿನಿಗಮದ ಅಧ್ಯಕ್ಷರಾದ ಚೇತನ್, ಜಿಲ್ಲಾ ಕಾಂಗ್ರೆಸ್ ಪಧಾದಿಕಾರಿಗಳಾದ ವಿಜಯ್ ಕುಮಾರ್ , ಶಿವಾನಂದ, ಎಸ್ ಟಿ ಹಾಲಪ್ಪ, ಹೆಚ್ ಸಿ ಯೋಗೀಶ್ ಮತ್ತಿತರರು ಉಪಸ್ಥಿತರಿದರು.
