ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.14
ಪೌರ ಕಾರ್ಮಿಕರು ಹಾಗೂ ಒಳಚರಂಡಿ ನಿರ್ವಹಣೆ ಕಾರ್ಮಿಕರು ಯುಜಿಡಿ ಸಮಸ್ಯೆಗಳಿಂದ ಹಿಡಿದು ನಗರದ ನೈರ್ಮಲ್ಯ ನಿರ್ವಹಣೆವರೆಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವೆಗೆ ಸಮಾಜ ಸದಾ ಋಣಿಯಾಗಿರಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಮಂಗಳವಾರ ‘ನಮಸ್ತೆ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೌರಕಾರ್ಮಿಕರು ನಗರದ ಸ್ವಚ್ಛತೆ ಮತ್ತು ನಾಗರಿಕರ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದ್ದು, ಇವರ ಕಲ್ಯಾಣ, ಸುರಕ್ಷತೆ ಹಾಗೂ ಕುಟುಂಬದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿವೆ ಎಂದು ಹೇಳಿದರು.
ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ರೂಪಿಸಲಾದ ರಾಷ್ಟ್ರೀಯ ಯೋಜನೆ ಸ್ವಚ್ಛ ಭಾರತ ಅಭಿಯಾನದ ಭಾಗವಾಗಿದ್ದು, ಪೌರ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಜೀವನಮಟ್ಟ ಸುಧಾರಣೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.
ಹಿಂದೆ ಮಲ ಹೊರುವ ಪದ್ಧತಿ ಅಸ್ತಿತ್ವದಲ್ಲಿದ್ದರೂ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಂತಹ ನಾಯಕರ ಪ್ರಯತ್ನದಿಂದ ಆ ಅಮಾನವೀಯ ಪದ್ಧತಿ ಅಂತ್ಯಗೊಂಡಿದೆ ಎಂದು ಸ್ಮರಿಸಿದರು.

ಪೌರಕಾರ್ಮಿಕರು ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಬ್ಯಾಂಕುಗಳ ಮೂಲಕ ಸಾಲ, ಸಬ್ಸಿಡಿ ಸೇರಿದಂತೆ ವಿವಿಧ ಆರ್ಥಿಕ ನೆರವು ಲಭ್ಯವಿದ್ದು, ಕಸ ವಿಲೇವಾರಿ ಮತ್ತು ಸ್ವಚ್ಛತಾ ಸಂಬಂಧಿತ ಉದ್ಯಮಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದ್ದು, ಕಸ ಸಾಗಣೆ ವಾಹನ ಚಾಲಕರನ್ನೂ ಪೌರಕಾರ್ಮಿಕರ ಸಮಾನವಾಗಿ ಪರಿಗಣಿಸಬೇಕು ಎಂಬ ಬೇಡಿಕೆಯನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಸರ್ಕಾರ ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಹೇಳಿದರು.
ಈ ವೇಳೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು. ಪೌರಕಾರ್ಮಿಕರ ಕುಟುಂಬಗಳ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಆಯುಕ್ತ ಮಾಯಣ್ಣ ಗೌಡ, ಸಂಪನ್ಮೂಲ ವ್ಯಕ್ತಿ ಅಪರಂಜಿ ಶಿವರಾಜು, ಉಪ ಆಯುಕ್ತ ತುಷಾರ್ ಬಿ.ಹೊಸೂರು, ತೇಜು ಪ್ರಸಾದ್, ಕಾರ್ಯಪಾಲಕ ಇಂಜಿನಿಯರ್ ಪ್ರಿಯಾ.ಪಿ, ಜಿಲ್ಲಾ ಪೌರಕಾರ್ಮಿಕ ನೌಕರರ ಸಂಘದ ಅಧ್ಯಕ್ಷ ಎನ್.ಗೋವಿಂದ ಇನ್ನಿತರರು ಇದ್ದರು.
