ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜು.17
ವ್ಯಕ್ತಿಯೊಬ್ಬರು ತಮ್ಮದೆ ಪ್ಯಾಂಟ್ ಅನ್ನ ಬಳಸಿ ಕಿಟಕಿಗೆ ನೇಣು ಬಿಗಿದುಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಗರದ ಕೆಎಸ್ಆರ್ಟಿಸಿ ಕೇಂದ್ರ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ಕಂಡು ಬಂದಿದೆ.
ಬೆಳಿಗ್ಗೆ ಎಂದಿನಂತೆ ಶೌಚಾಲಯ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಶೌಚಾಲಯದ ಒಳಭಾಗದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಪ್ರಾಥಮಿಕ ತನಿಖೆಯಲ್ಲಿ, ಮೃತರು ತಮ್ಮದೇ ಪ್ಯಾಂಟ್ ಅನ್ನು ಬಳಸಿ ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಪೊಲೀಸರು ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಮ್. ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರು ಶಿವಮೊಗ್ಗಕ್ಕೆ ಯಾವ ಕಾರಣಕ್ಕೆ ಬಂದಿದ್ದರು, ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
