ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.21
ದೆಹಲಿಯ ಜಂತರ್-ಮಂತರ್ನಲ್ಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿಕೋಪಕ್ಕೆ ಹೋಗಿದ್ದು, ಇದರಲ್ಲಿ ಖಂಡಿತವಾಗಿಯೂ ದುಷ್ಟಶಕ್ತಿ ಮತ್ತು ವಿದೇಶಿ ಶಕ್ತಿಗಳ ಕೈವಾಡ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆಯ ಅವಕಾಶ ಇದೆ. ಆದರೆ ಹಾಗಂತ ಪೊಲೀಸ್ ಸಿಬ್ಬಂದಿಗಳ ಮೇಲೆ ಕಲ್ಲುತೂರಿ ಲೋಕಸಭೆಗೆ ಮುತ್ತಿಗೆ ಹಾಕುತ್ತೇವೆ. ಅಧಿವೇಶನಕ್ಕೆ ಅಡ್ಡಿಪಡಿಸುತ್ತೇವೆ ಎನ್ನುವುದು ಸರಿಯಲ್ಲ ಎಂದರು.
ಗಮನಿಸಿ: ಪ್ರತಿಭಟನೆಯಿಂದ ಅರಾಜಕತೆ ಸೃಷ್ಟಿಸುವ ಪ್ರಯತ್ನ: ಬಿ.ವೈ.ವಿಜಯೇಂದ್ರ
ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದು ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಕಲ್ಲು ತೂರಾಟ ಮಾಡಿದರೆ ಅನಿವಾರ್ಯವಾಗಿ ಪೊಲೀಸರು ಲಾಠಿಚಾರ್ಜ್ ಮಾಡುತ್ತಾರೆ. ಅಲ್ಲಿ ಪ್ರತಿಭಟನಾಕಾರರ ವರ್ತನೆ ನೋಡಿದರೆ ಅವರು ಗೂಂಡಾ ವರ್ತನೆ ಮಾಡಿದ್ದಾರೆ. ಮೋದಿ ಆಡಳಿತದ ಬಗ್ಗೆ ಅವರಿಗೆ ಸಮಾಧಾನವಿರಬಹುದು. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಗೂಂಡಾಗಿರಿಯನ್ನು ಒಪ್ಪಲು ಸಾಧ್ಯವಿಲ್ಲ. ದೇಶಭಕ್ತರು ಪ್ರಧಾನಿ ಮೋದಿ ಜೊತೆಗೆ ಇದ್ದಾರೆ. ಇಡೀ ದೇಶವೇ ಮೋದಿಯವರ ಬೆಂಬಲಕ್ಕೆ ಇದೆ. ವಿದ್ಯಾರ್ಥಿಗಳ ಹೆಸರಿನಲ್ಲಿ ಗೂಂಡಾಗಿರಿಯನ್ನು ದೇಶಪ್ರೇಮಿಗಳು ಒಪ್ಪಲು ಸಾಧ್ಯವಿಲ್ಲ ಎಂದರು.
