ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಆ.14
ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
2026-27ನೇ ಜಲ ವರ್ಷವು ಎಲ್ ನಿನೋ ಪರಿಣಾಮವಾಗಿ ರಾಜ್ಯ ಸಂಕಷ್ಟದಲ್ಲಿದೆ. ದಿನಕ್ಕೆ 12 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಮಾಡಿರುವ ಶಿಫಾರಸು ಅವೈಜ್ಞಾನಿಕವಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅನುಮೋದಿಸಿ ಕರ್ನಾಟಕ ಸರ್ಕಾರ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ ಹರಿಸಲು ಆದೇಶ ಮಾಡಿರುವುದು ಇಂದಿನ ಪರಿಸ್ಥಿತಿಯಲ್ಲಿ ಪಾಲನೆ ಮಾಡುವುದು ಕಷ್ಟಕರವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ರಾಜ್ಯದಲ್ಲಿ ಕಾವೇರಿ ಕೊಳ್ಳದ ನೀರನ್ನು ಇಲ್ಲಿಯವರೆಗೂ ಕೃಷಿಗೆ ಬಿಡುಗಡೆ ಮಾಡಿಲ್ಲ. ಮುಂದಿನ ಮಳೆಗಾಲದವರೆಗೆ ಜನರ ಕುಡಿಯುವ ನೀರಿಗಾಗಿ ಮಾತ್ರ ಕೇಳುತ್ತಿದೆ. ಆದರೆ, ತಮಿಳುನಾಡು ಬೆಳೆಗಾಗಿ ನೀರನ್ನು ಕೇಳುತ್ತಿದೆ. ಈ ವಿಚಾರವನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಿ ನಮ್ಮ ಹಕ್ಕನ್ನು ಪಡೆಯಬೇಕು ಎಂದು ಆಗ್ರಹಿಸಲಾಗಿದೆ.
ಕಾವೇರಿ ವಿಚಾರವಾಗಿ ಪದೇ ಪದೇ ಕರ್ನಾಟಕಕ್ಕೆ ನೀರು ಪ್ರಾಧಿಕಾರಿಗಳು ಕರ್ನಾಟಕದ ರೈತರ, ಜನರ ವಿರುದ್ಧ ತೀರ್ಪು ನೀಡುತ್ತಿವೆ. ರಾಜ್ಯ ಸರ್ಕಾರ ಸಂಕಷ್ಟ ಸೂತ್ರ ರೂಪಿಸಲು ಪ್ರಯತ್ನಿಸಬೇಕು. ಅಲ್ಲಿಯವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕರ್ನಾಟಕ ಸರ್ಕಾರ ನೀರನ್ನು ಹರಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಪ್ರಮುಖರಾದ ಪಿ. ಶೇಖರಪ್ಪ, ಇ.ಬಿ. ಜಗದೀಶ್, ಕೆ. ರಾಘವೇಂದ್ರ, ಹಿಟ್ಟೂರು ರಾಜು, ಸಿ.ಬಿ.ಹನುಮಂತಪ್ಪ, ಜಿ.ಎನ್. ಪಂಚಾಕ್ಷರಿ, ಜ್ಞಾನೇಶ್, ಸಿ. ಚಂದ್ರಪ್ಪ, ಮೊದಲಾದವರಿದ್ದರು.
