ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.1
ಜನಪರ ಆಡಳಿತ ನೀಡುತ್ತಿರುವ ನಮ್ಮ ಸರ್ಕಾರದ ಬಗ್ಗೆ ಪ್ರಶ್ನಿಸಲು ಸೂಕ್ತ ವಿಷಯಗಳೇ ಇಲ್ಲದ ಕಾರಣ ಬಿಜೆಪಿಯವರು ಮಾಡಿದ ಪಾಪ ತೊಳೆದುಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ವ್ಯಂಗ್ಯವಾಡಿದರು.
ಸೊರಬದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆರೋಪ ಮಾಡಿದರೆಂಬ ಕಾರಣಕ್ಕೆ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿಯಾಗಿದೆ. ಆದರೂ ಬಿಜೆಪಿಯವರು ಈ ವಿಚಾರದಲ್ಲಿ ಇನ್ನೂ ಬಾಯಿ ಬಡಿದುಕೊಳ್ಳುವುದನ್ನು ಬಿಟ್ಟಿಲ್ಲ ಎಂದು ಕುಟುಕಿದರು.
ಗಮನಿಸಿ: ಕಸ್ತೂರಿ ರಂಗನ್ ವರದಿ ಕಸದ ಬುಟ್ಟಿಗೆ ಹಾಕಲು ಯೋಗ್ಯ
*ರಾಜ್ಯದ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ*
“ಇದೇ ವಿಷಯವನ್ನು ಮುಂದಿಟ್ಟುಕೊಂಡು ವಿಧಾನಸಭೆಯ ಮುಂಗಾರು ಅಧಿವೇಶನವನ್ನು ಬಿಜೆಪಿಯವರು ಹಾಳು ಮಾಡಿದರು. ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಅವರಿಗೆ ಇಷ್ಟವಿಲ್ಲ. ಕಸ್ತೂರಿ ರಂಗನ್ ವರದಿ ಬಗ್ಗೆಯೂ ಮಾತನಾಡುವುದಿಲ್ಲ. ಒಟ್ಟಾರೆ ರಾಜ್ಯದ ಹಿತಾಸಕ್ತಿ ಬಗ್ಗೆ ಬಿಜೆಪಿಗೆ ಎಳ್ಳಷ್ಟೂ ಕಾಳಜಿ ಇಲ್ಲ,” ಎಂದು ಆರೋಪಿಸಿದರು.
ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರ, ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ‘ವಾಷಿಂಗ್ಮೆಷಿನ್’ ಮೂಲಕ ಎಷ್ಟು ಮಂದಿ ಸ್ವಚ್ಛರಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಹೆದರಿಸುವುದೇ ಬಿಜೆಪಿಯವರ ಗುಣ ಮತ್ತು ರಾಜಕೀಯ ಬಂಡವಾಳವಾಗಿದೆ ಎಂದು ಟೀಕಿಸಿದರು.
