ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಸೆ.1
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಮಂಗಳವಾರ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಮಾಡಿದ ಸ್ಥಳದಲ್ಲಿ ಬಿಜೆಪಿ ಕಾರ್ಯಕರ್ತರು ‘ಶುದ್ಧೀಕರಣ ಹವನ’ ಮಾಡಿದ್ದನ್ನು ರಾಹುಲ್ ಗಾಂಧಿ ಅವರು ಖಂಡಿಸಿ, ಇದು ದಲಿತ ವಿರೋಧಿ ಮನಸ್ಥಿತಿ, ಅಸ್ಪೃಶ್ಯತೆ ಎಂದು ಹೇಳಿದ್ದರು. ಇದಕ್ಕೆ ಆಕ್ಷೇಪಿಸಿ ಅವರ ವಿರುದ್ಧವೇ ಹಲ್ದ್ವಾನಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, “ಬಿಜೆಪಿ ಸರ್ಕಾರ ರಾಜ್ಯ ಯಂತ್ರವನ್ನು ದುರುಪಯೋಗಪಡಿಸಿಕೊಂಡು ದಲಿತ ದೌರ್ಜನ್ಯದ ವಿರುದ್ಧ ಮಾತನಾಡುವವರನ್ನು ಗುರಿಯಾಗಿಸುತ್ತಿದೆ. ಹಲ್ದ್ವಾನಿ ಶುದ್ಧೀಕರಣವು ಜಾತಿ ತಾರತಮ್ಯದ ಸಂಕೇತ. ಅದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಎಫ್ಐಆರ್ ಹಾಕಲಾಗಿದೆ. ಇದು ಸಂವಿಧಾನ ವಿರೋಧಿ ನಡೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಖರ್ಗೆ ಅವರ ಮೇಲಿನ ಶುದ್ಧೀಕರಣವು ಇಡೀ ದಲಿತ ಸಮುದಾಯಕ್ಕೆ ಮಾಡಿದ ಅವಮಾನ. ಇದರ ವಿರುದ್ಧ ಎಫ್ಐಆರ್ ಹಾಕಬೇಕೆಂದು ನಾವು ರಾಜ್ಯಪಾಲರಿಗೆ ಮನವಿ ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಬದಲಿಗೆ ರಾಹುಲ್ ಗಾಂಧಿ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ” ಎಂದರು.
ಪ್ರತಿಭಟನೆಯಲ್ಲಿ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ.ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರುಗಳಾದ ಎಸ್.ಟಿ.ಚಂದ್ರಶೇಖರ್, ಆರ್.ರಾಜಶೇಖರ್, ಪಿ.ಎಸ್.ಗಿರೀಶ್ ರಾವ್, ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಢಿ, ಪುಷ್ಪ ಶಿವಕುಮಾರ್, ಎಸ್.ಟಿ.ಹಾಲಪ್ಪ, ಎಸ್ಸಿ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ವಕ್ತಾರ ಜಿ.ಡಿ.ಮಂಜುನಾಥ್ ಇನ್ನಿತರರು ಇದ್ದರು.
