ಶಿವಮೊಗ್ಗ ಟೆಲೆಕ್ಸ್ ಸುದ್ದಿ,ಜು.22
ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ದೆಹಲಿಯ ಜಂತರ್ ಮಂತರ್ ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆಸಿರುವ ಬರ್ಬರ ಲಾಠಿ ಚಾರ್ಜ್ ಪ್ರಜಾತಂತ್ರದ ಮೇಲೆ ನಡೆದ ನೇರ ದಾಳಿಯಾಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಹಾಗು ಡಾ.ಶರತ್ ಮರಿಯಪ್ಪ ಫೌಂಡೇಷನ್ನ ಅಧ್ಯಕ್ಷ ಡಾ. ಶರತ್ ಮರಿಯಪ್ಪ ಕಿಡಿಕಾರಿದ್ದಾರೆ.
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನಾ ವಿದ್ಯಾರ್ಥಿಗಳ ಮೇಲಿನ ಬರ್ಬರ ಹಲ್ಲೆಯನ್ನು ಈ ಹೇಡಿತನದ ಕೃತ್ಯವಾಗಿದೆ. ವಿದ್ಯಾರ್ಥಿಗಳು ಕೇಳಿದ್ದು ಶಿಕ್ಷಣ, ಉದ್ಯೋಗ ಮತ್ತು ಭವಿಷ್ಯದ ಭದ್ರತೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಅವರಿಗೆ ಕೊಟ್ಟಿದ್ದು ರಕ್ತ ಮತ್ತು ಗಾಯ. ಈ ಸಂಪೂರ್ಣ ವೈಫಲ್ಯಕ್ಕೆ ನೇರ ಹೊಣೆಯನ್ನು ಹೊರಬೇಕಾಗಿರುವುದು ಕೇಂದ್ರ ಶಿಕ್ಷಣ ಸಚಿವರು. ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿ, ವಿದ್ಯಾರ್ಥಿಗಳ ಧ್ವನಿ ಎತ್ತಿದರೆ ಲಾಠಿ ಬೀಸುವ ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಸಾದ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಹಲ್ಲೆ ನಡೆಸಲು ಆದೇಶ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಗಾಯಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಸರ್ಕಾರವೇ ಸಂಪೂರ್ಣ ವೈದ್ಯಕೀಯ ವೆಚ್ಚ ಮತ್ತು ಸೂಕ್ತ ಪರಿಹಾರ ನೀಡಬೇಕು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು.
ಪ್ರಶ್ನೆ ಮಾಡಿದರೆ ಜೈಲು, ಪ್ರತಿಭಟನೆ ಮಾಡಿದರೆ ಲಾಠಿ ಇದೇ ಬಿಜೆಪಿ ಸರ್ಕಾರದ ನೀತಿಯಾಗಿದೆ. ಈ ಸರ್ವಾಧಿಕಾರಿ ಧೋರಣೆಗೆ ನಾವು ಎಂದಿಗೂ ಮಣಿಯುವುದಿಲ್ಲ. ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರಿಗೆ ನಮ್ಮ ಬೆಂಬಲ ಸದಾ ಇದೆ. ಅವರ ಹೋರಾಟವನ್ನೆ ದಮನ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ ಆಗಿದೆ ಎಂದರು.
ವಿದ್ಯಾರ್ಥಿಗಳ ಈ ಹೋರಾಟಕ್ಕೆ ಕಾಂಗ್ರೆಸ್ ವತಿಯಿಂದ ಸಂಪೂರ್ಣ ಬೆಂಬಲ ನೀಡುತ್ತದೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಷ್ಟ್ರಾದ್ಯಂತ ಉಗ್ರ ಹೋರಾಟ ಹಾಗೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
